- ವಿಚಾರಣೆ ನಡೆಸಿದ್ದ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶ
- ಹಿಂದಿನ ಅದ್ಯಕ್ಷೆ ಉಷಾ ಮಹೇಶ ದಾಸರ, ಅನೀಲ ಅಬ್ಬಿಗೇರಿ ಹಾಗೂ ಗೂಳಪ್ಪ ಮುಶಿಗೇರಿ ಅನರ್ಹಗೊಂಡ ಸದಸ್ಯರು
ಪ್ರಜಾಪಥ ವಾರ್ತೆ
ಗದಗ: ಗದಗ-ಬೆಟಗೇರಿ ನಗರಸಭೆ ಮಾಲಿಕತ್ವದ 54 ವಕಾರ ಸಾಲುಗಳನ್ನು ಕಾನೂನು ಬಾಹಿರವಾಗಿ ಲೀಜ್ ನೀಡಲು ನಕಲಿ ಠರಾವ್ ಸೃಷ್ಟಿ ಹಾಗೂ ಅದಕ್ಕೆ ಅಂದಿನ ಪೌರಾಯುಕ್ತರ ಹೆಸರಲ್ಲಿ ಫೋರ್ಜರಿ ಸಹಿ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಹಿಂದಿನ ಅಧ್ಯಕ್ಷೆ ಉಷಾ ದಾಸರ, ಸದಸ್ಯರಾದ ಅನೀಲ ಅಬ್ಬಿಗೇರಿ, ಗೂಳಪ್ಪ ಮುಶಿಗೇರಿ ಅವರ ಸದಸ್ಯತ್ವ ಅನರ್ಹಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ. ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.
2023ರ ಅಕ್ಟೋಬರ್ 25ರಿಂದ 2024ರ ಜುಲೈ 22ರ ನಡುವಿನ ಅವಧಿಯಲ್ಲಿ ಗದಗ-ಬೆಟಗೇರಿ ಮಾಲೀಕತ್ವದ ಸಾವಿರಾರು ಕೋಟಿ ರೂ. ಮೌಲ್ಯದ 54 ವಕಾರಸಾಲುಗಳನ್ನು ಕಾನೂನು ಬಾಹಿರವಾಗಿ ದೀರ್ಘ ಅವಧಿಗೆ ಒಪ್ಪಂದ ಮಾಡಿಕೊಂಡು ಸುಳ್ಳು ಠರಾವು ಸೃಷ್ಟಿಸಿದ ಆರೋಪದಡಿ ನಗರಸಭೆ ಮಾಜಿ ಪ್ರಭಾರ ಪೌರಾಯಕ್ತ ಪ್ರಶಾಂತ ವರಗಪ್ಪನವರ ಅವರು ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ 2024ರ ಆ. 15ರಂದು ದೂರು ದಾಖಲಿಸಿದ್ದರು.
2024ರ ಫೆಬ್ರವರಿ 9ರಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಠರಾವು ಪಾಸಾಗಿದೆ ಎಂದು ನಕಲಿ ಠರಾವು ಸೃಷ್ಟಿಸಿ 2024ರ ಜುಲೈ 22ರಂದು ವಕಾರಸಾಲಿನ ಎಲ್ಲ ಅನುಭೋಗದಾರರಿಗೆ ಕಬ್ಜಾ ನೀಡಲಾಗಿದೆ ಎಂದು ನಕಲಿ ಪತ್ರವನ್ನು ಸೃಷ್ಟಿಸಿ ಎರಡೂ ದಾಖಲೆಗಳಿಗೆ ಪಿರ್ಯಾದಿದಾರರ ನಕಲಿ ಸಹಿಯನ್ನು ಮಾಡಿ ಗದಗ-ಬೆಟಗೇರಿ ನಗರಸಭೆಗೆ ಹಾಗೂ ಸರಕಾರಕ್ಕೆ ಮೋಸ ಮಾಡಿದ ಆರೋಪದಡಿ ದೂರು ದಾಖಲಾಗಿತ್ತು.
ಅತ್ತ ಆರೋಪ ಎದುರಿಸುತ್ತದ್ದ ಸದಸ್ಯರಿಗೆ ಪ್ರಾದೇಶಿಕ ಆಯುಕ್ತ ಎಸ್.ಬಿ. ಶೆಟ್ಟೆಣ್ಣವರ ಅವರು ಖುದ್ದು ಹಾಜರಾಗಲ ನೋಟೀಸ್ ನೀಡಿ, ಫೆ.13 ರಂದು ವಿಚಾರಣೆ ನಡೆಸಿ, ಆದೇಶ ಕಾಯ್ದಿರಿಸಿದ್ದರು..
